Scp & Tsp meeting

ಎಸ್‌ಸಿಪಿ-ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆ

ಅಂಗವಿಕಲ ಶಿಶು ಕಲ್ಯಾಣ ಕೇಂದ್ರಗಳಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಿ: ಡಾ. ಸುರೇಶ ಬಿ.ಇಟ್ನಾಳ

ಕರುನಾಡ ಬೆಳಗು ಸುದ್ದಿ

ಕೊಪ್ಪಳ , ೧೯- ಎಸ್‌ಸಿಪಿ-ಟಿಎಸ್‌ಪಿಯ ಯೋಜನೆಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿ ಕಾಮಗಾರಿಗಳ ಗುಣಮಟ್ಟ ಕಾಪಾಡಿ ಹಾಗೂ ಅಂಗವಿಕಲ ಶಿಶು ಕಲ್ಯಾಣ ಕೇಂದ್ರಗಳಲ್ಲಿ ಯಾವುದೇ ಕೊರತೆಯಾಗದಂತೆ ನಿಗಾ ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ 2013 ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ, ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳ ಆಗಷ್ಟ್-2025ರ ಅಂತ್ಯದವರೆಗಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಮೂಲ ಧ್ಯೇಯ ಮತ್ತು ಮಾನದಂಡಗಳಿಗೆ ಅನುಸಾರವಾಗಿ ಸಂಬAಧಿಸಿದ ಸಮುದಾಯಗಳ ಮನವಿಯನ್ನು ಪರಿಶೀಲಿಸಿ. ಅಂಗವಿಕಲರ ಕಲ್ಯಾಣಕ್ಕಾಗಿ ನಿಯೋಜಿಸಿದ ಹಣವನ್ನು ಸರಿಯಾಗಿ ಉಪಯೋಗಿಸಿ. ಕೊಪ್ಪಳದ ಬಿ.ಟಿ ಪಾಟೀಲ ನಗರದಲ್ಲಿರುವ ಅಂಗವಿಕಲ ಮಹಿಳಾ ಹಿರಿಯ ನಾಗರಿಕರ ವಸತಿ ನಿಲಯದಲ್ಲಿ ಯಾವುದೇ ಸಮಸ್ಯೆ ಬಾರದಂತೆ ಎಚ್ಚರ ವಹಿಸಿ ಎಂದು ಹೇಳಿದರು.
ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳ ನಿರ್ಮಾಣದ ಯಾವುದೇ ಸಿವಿಲ್ ಕಾಮಗಾರಿಗಳನ್ನು ನಡೆಸುವಾಗ ಅಧಿಕಾರಿಗಳು ಆ ಪ್ರದೇಶದಲ್ಲಿ ಯೋಜನೆಯ ಫಲಾನುಭವಿಗಳು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ವೈಯಕ್ತಿಕ ಯೋಜನೆಗಳಡಿ ಫಲಾನುಭವಿಗಳ ಆಯ್ಕೆ ಮಾಡುವಾಗ ಸರ್ಕಾರದ ಮಾನದಂಡಗಳನ್ನು ಅನುಸರಿಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ. ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಮೂಲ ಧ್ಯೇಯಕ್ಕೆ ಅನುಸಾರವಾಗಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಯೋಜನೆಯ ಲಾಭ ಒದಗಿಸಿ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಯಾವ ಉದ್ದೇಶಕ್ಕೆ ಬಳಸಲಾಗಿದೆ, ಯಾವ ಪ್ರದೇಶದಲ್ಲಿ ಕಾಮಗಾರಿ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ಸರಿಯಾಗಿ ಸಾರ್ವಜನಿಕರಿಗೆ ತಿಳಿಸಿ ಮತ್ತು ಆಯಾ ಆರ್ಥಿಕ ವರ್ಷದಲ್ಲಿ ನಿಯಮಾನುಸಾರ ಬಳಕೆ ಮಾಡಿಕೊಳ್ಳಬೇಕು. ಕ್ರಿಯಾ ಯೋಜನೆ ಅನುಮೋದನೆಗೊಂಡ ನಂತರ ಅನಗತ್ಯ ವಿಳಂಬ ಮಾಡುವಂತಿಲ್ಲ. ನಡೆಸಬೇಕಾದ ಕಾಮಗಾರಿ ಮತ್ತು ಯೋಜನೆಯ ಸಮರ್ಪಕ ಅನುಷ್ಠಾನ ಕುರಿತಂತೆ ರಚನಾತ್ಮಕವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಭೌತಿಕ ಮತ್ತು ಆರ್ಥಿಕ ಪ್ರಗತಿ ಬಗ್ಗೆ ಮುಂದಿನ ಸಭೆಯಲ್ಲಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಕೊಪ್ಪಳ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಅಜ್ಜಪ್ಪ ಸೊಗಲದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಟಿ.ವೈ. ಶೆಟ್ಟೆಪ್ಪನವರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಪಿ. ಮಲ್ಲಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಪಿ.ಬಿ. ಹಿರೇಗೌಡರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪೋಸ್ಟರ್ ಬಿಡುಗಡೆ: ಸಭೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರೇಬಿಸ್ ಹುಚ್ಚುನಾಯಿ ರೋಗ ತಡೆಗಟ್ಟುವ ಕುರಿತ ಪೋಸ್ಟರ್ ಬಿಡುಗಡೆ ಮಾಡಲಾಯಿತು.

Leave a Reply

Your email address will not be published. Required fields are marked *

error: Content is protected !!