
ವಿಕಸಿತ ಭಾರತ ಸಂಕಲ್ಪ ಯಾತ್ರೆ
ಸಂಸದ ಸಂಗಣ್ಣ ಅಭಿಮತ
ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯ ತಲುಪಿಸುವೆ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ, 29- ಭಾರತದ ಕಟ್ಟಕಡೆಯ ವ್ಯಕ್ತಿಗೂ ಕೂಡ ದೇಶದ ಸೌಲಭ್ಯಗಳು ತಲುಪಬೇಕೆಂಬ ಸದುದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಯಾತ್ರೆ ಆರಂಭಿಸಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಅವರು ತಾಲೂಕಿನ ಗುನ್ನಾಳ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಲಾಯಿತು.
ಭಾರತವನ್ನು ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಪಸ್ಸಿನ ರೀತಿ ಅವರು ಕೆಲಸ ಮಾಡುತ್ತಿದ್ದಾರೆ. ವಿಕಸಿತ ಭಾರತ ಸಂಕಲ್ಪ ಯಾತ್ರೆ 52ನೇ ದಿನಕ್ಕೆ ಕಾಲಿಟಿದ್ದು, ಗ್ರಾಮದಲ್ಲಿ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದರು.
ಈಹಿಂದೆ ರಾಜ್ಯ, ಕೇಂದ್ರದ ಯೋಜನೆಯ ಪ್ರಯೋಜನ ಪಡೆಯಲು ಸರ್ಕಾರಿ ಕಚೇರಿ ಮುಂದೆ ತಿಂಗಳುಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಿತ್ತು. ಕಮಿಷನ್ ಕೊಟ್ಟರಷ್ಟೇ ಕೇಂದ್ರದ ಯೋಜನೆಯ ಪ್ರಯೋಜನ ಸಿಗುತ್ತಿತ್ತು. ಕೇಂದ್ರದ 100 ರೂ. ಅನುದಾನ ರಾಜ್ಯದ ಫಲಾನುಭವಿಗಳಿಗೆ ಕೇವಲ 15 ರೂ. ಸಿಗುತ್ತಿತ್ತು. ಉಳಿದುದನ್ನು ಬೋಕರ್ಗಳು ತಿಂದು ತೇಗುತ್ತಾರೆ ಎಂದು ಪ್ರಧಾನಿಯಾಗಿದ್ದ ರಾಜೀವ್ ಗಾಂಧಿಯವರೇ ಹೇಳಿದ್ದರು. ಆದರೀಗ ಒಂದು ರೂ. ಭ್ರಷ್ಟಾಚಾರ ಇಲ್ಲದೇ ನೇರವಾಗಿ ಫಲಾನುಭವಿಗಳಿಗೆ ಸಿಗುತ್ತಿದೆ ಎಂದರು.
ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳು 51 ಕೋಟಿ ಜನರಿಗೆ ಹೊಸ ಬ್ಯಾಂಕ್ ಖಾತೆ ತೆರೆಸಿದ್ದಾರೆ. ಇದರಿಂದಾಗಿ ಜನ್ಧನ್ ಖಾತೆಗೆ ಎಲ್ಲ ಸವಲತ್ತುಗಳು, ಕಮಿಷನ್ ರಹಿತವಾಗಿ ತಲುಪುತ್ತಿದೆ. ಮಧ್ಯವರ್ತಿಗಳಿಲ್ಲದೆ ಯೋಜನೆಗಳು ತಲುಪುತ್ತಿವೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಬಸವಲಿಂಗಪ್ಪ ಭೂತೆ, ಅರವಿಂದಗೌಡ ಪಾಟೀಲ್, ಗ್ರಾ.ಪಂ. ಅಧ್ಯಕ್ಷೆ ಶಾಂತಮ್ಮ ಕಂಬಳಿ, ಉಪಾಧ್ಯಕ್ಷ ಈಶಪ್ಪ ಹಟ್ಟಿ, ಕೆ.ಎಂ.ಎಫ್ ನಿರ್ದೇಶಕ ಶಿವಪ್ಪ ವಾದಿ, ಮಲ್ಲಿಕಾರ್ಜುನ ಹರ್ಲಾಪುರ, ಅಯ್ಯನಗೌಡ್ರ ಕೆಂಚಮ್ಮನವರ, ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ರಾಚಪ್ಪ , ಮಾಜಿ ತಾ.ಪಂ. ಸದ್ಯಸ ಶರಣಪ್ಪ ಇಂಗಳದಾಳ ಇದ್ದರು.
ಕೇಂದ್ರ ಸರ್ಕಾರದ ಯೋಜನೆಗಳನ್ನು ಪಡೆಯುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು.
ಬಿಜೆಪಿ ಕಾರ್ಯಕರ್ತರು ಹಾಗೂ ಅಧಿಕಾರಿಗಳು ಕೇಂದ್ರದ ಯೋಜನೆ ಮನೆ ಮನೆಗೆ ಹೋಗಿ ತಿಳಿಸಬೇಕು.
– ಸಂಗಣ್ಣ ಕರಡಿ, ಸಂಸದರು.