
ಆದಿಮ ಮನುಷ್ಯತ್ವದ ಪ್ರಜ್ಞೆಯನ್ನು ಎತ್ತರಿಸುತ್ತಿರುವ ಸಾಂಸ್ಕೃತಿಕ ಚಳವಳಿ: ಸಿ.ಎಂ.ಸಿದ್ದರಾಮಯ್ಯ
ನಮ್ಮ ಸಂವಿಧಾನ ಅಪಾಯದಲ್ಲಿದೆ
ಪ್ರಜಾಪ್ರಭುತ್ವ ಶಿಥಿಲವಾಗುತ್ತಿದೆ : ಸಿ.ಎಂ.ಸಿದ್ದರಾಮಯ್ಯ ಆತಂಕ
ಕರುನಾಡ ಬೆಳಗು ಸುದ್ದಿ
ಕೋಲಾರ ಡಿ 27 – ನಮ್ಮ ಸಂವಿಧಾನ ಅಪಾಯದಲ್ಲಿದೆ. ಪ್ರಜಾಪ್ರಭುತ್ವ ಶಿಥಿಲವಾಗುತ್ತಿದೆ: ಸಿ.ಎಂ.ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.
ಆದಿಮ ಸಾಂಸ್ಕೃತಿಕ ಕೇಂದ್ರದ ಹುಣ್ಣಿಮೆ ಹಾಡು-200 ರ ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಮಾತುಗಳನ್ನು ಆಡಿದರು.
ನಮ್ಮ ಸಂವಿಧಾನ ಉಳಿದು, ಪ್ರಜಾಪ್ರಭುತ್ವ ಗಟ್ಟಿಯಾದರೆ ಮಾತ್ರ ದುಡಿಯುವವರಿಗೆ ಬದುಕಿನ ಅವಕಾಶಗಳು ದಕ್ಕುತ್ತವೆ. ಇದನ್ನು ಜನ ಸಮುದಾಯ ಅರ್ಥ ಮಾಡಿಕೊಳ್ಳಬೇಕು ಎಂದರು.
ಆದಿಮ ಸಾಂಸ್ಕೃತಿಕ ಚಳವಳಿ ಮೂಲಕ ಬದಲಾವಣೆಯ ಕೇಂದ್ರ ಆಗುತ್ತದೆ ಎಂದು ಆಶಯ ವ್ಯಕ್ತಪಡಿಸಿದರು. ಸಮ ಸಮಾಜ ಮತ್ತು ಮಾನವೀಯತೆಯ ಸಮಾಜವನ್ನು ಗಟ್ಟಿಗೊಳಿಸಬೇಕಾದ ಸಂದರ್ಭ ಇದಾಗಿದೆ ಎಂದರು.
ಅಸಮಾನತೆ ದೈವ ಸೃಷ್ಟಿ ಅಲ್ಲ. ಮನುಷ್ಯ ಸೃಷ್ಟಿ. ಸಮಾಜದಲ್ಲಿ ಯಾರಿಗೆ ಅವಕಾಶಗಳು ಸಿಕ್ಕಿತೋ ಅವರು ಬಹುಜನರನ್ನು ಅವಕಾಶ ವಂಚಿತರನ್ನಾಗಿ ಮಾಡಿದರು. ಇದರಿಂದ ಅಸಮಾನತೆ ಸೃಷ್ಟಿಯಾಯಿತು. ಅಕ್ಷರ ಸಂಸ್ಕೃತಿಯಿಂದ ವಂಚಿತರಾದವರು ಅಸಮಾನತೆಗೆ ತುತ್ತಾದರು ಎಂದು ವಿವರಿಸಿದರು.
ಅಸಮಾನತೆಗೆ ತುತ್ತಾದವರು ಪ್ರಜಾತಂತ್ರದ ಸೌಧವನ್ನು ದ್ವಂಸ ಮಾಡ್ತಾರೆ ಎಂದು ಅಂಬೇಡ್ಕರ್ ಅವರು ಎಚ್ಚರಿಸಿದ್ದರು. ನಮ್ಮದು ಚಲನೆ ರಹಿತ ಜಾತಿ ವ್ಯವಸ್ಥೆ. ಆದ್ದರಿಂದ ಬುದ್ದನ ಕಾಲದಿಂದಲೂ ಜಾತಿ ವ್ಯವಸ್ಥೆ ವಿರುದ್ಧ ಪ್ರಜ್ಞೆ ಮೂಡಿಸಿದರೂ ಇನ್ನೂ ಜಾತಿ ವ್ಯವಸ್ಥೆ ಗಟ್ಟಿಯಾಗುತ್ತಲೇ ಇದೆ ಎಂದು ಬೇಸರ ವ್ಯಕ್ತಪಡಿಸಿದರು.
ಪಟ್ಟಭದ್ರರು ಬಹಳ ಕೆಟ್ಟ ವ್ಯವಸ್ಥೆಯನ್ನು ರೂಪಿಸಿದ್ದಾರೆ. ಬಸವಾದಿ ಶರಣರು 800 ವರ್ಷಗಳ ಹಿಂದೆಯೇ “ಇವ ನಮ್ಮವ ಇವ ನಮ್ಮವ” ಎಂದು ಕರೆದರೂ ಇವತ್ತಿಗೂ “ಇವನಾರವ ಇವನಾರವ” ಎನ್ನುವ ವ್ಯವಸ್ಥೆಯೇ ಮುಂದುವರೆದಿದೆ ಎಂದು ವಿವರಿಸಿದರು.
ಸ್ವಾರ್ಥರು, ಅಧಿಕಾರಕ್ಕೆ ಅಂಟಿಕೊಳ್ಳುವವರು ಪಟ್ಟಭದ್ರರ ವ್ಯವಸ್ಥೆ ಜತೆಗೆ ರಾಜಿ ಮಾಡಿಕೊಳ್ಳುತ್ತಾರೆ. ಇದರಿಂದ ಸಮಾಜ ಸಾಕಷ್ಟು ನೋವು ತಿನ್ನುತ್ತದೆ. ಕಟ್ಟ ಕಡೆಯ ಮನುಷ್ಯನಿಗೆ ದಕ್ಕಬೇಕಾದ ಪಾಲನ್ನು ದಕ್ಕದಂತೆ ಮಾಡುತ್ತದೆ ಎಂದರು.
ಕಾಯಕ ಮಾಡುವವರು ಅವಕಾಶಗಳಿಂದ ವಂಚಿತರಾಗುತ್ತಾರೆ. ಯಾರು ಕಾಯಕ ಜೀವಿಗಳಲ್ಲವೋ ಅವರು ಸಂಪತ್ತನ್ನು ಅನುಭವಿಸುತ್ತಿದ್ದಾರೆ. ಉತ್ಪಾದನಾ ಪ್ರಕ್ರಿಯೆಯಲ್ಲಿ ಎಲ್ಲರೂ ಭಾಗಿ ಆಗಬೇಕು. ಉತ್ಪಾದನೆಯನ್ನು ಸಮವಾಗಿ ಹಂಚಿಕೆ ಮಾಡಿಕೊಳ್ಳಬೇಕು. ಆಗ ಮಾತ್ರ ಶೋಷಣೆ ಮುಕ್ತ ಸಮಾಜ ಸೃಷ್ಟಿಯಾಗುತ್ತದೆ ಎಂದರು.
ನಾನು ಮತ್ತು ನಮ್ಮ ಸರ್ಕಾರ ಶೋಷಿತರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದೇನೆ. ಇದೇ ಸಂದರ್ಭದಲ್ಲಿ ಆದಿಮ ನಡೆದು ಬಂದ ಹಾದಿಯನ್ನು ದಾಖಲಿಸಿರುವ ನೆನಪಿನ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.
ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಉನ್ನತ ಶಿಕ್ಷಣ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ನಂಜೇಗೌಡರು, ಕೊತ್ತನೂರು ಮಂಜುನಾಥ್, ಅನಿಲ್ ಕುಮಾರ್, ಮಾಜಿ ಸಭಾಪತಿ ಸುದರ್ಶನ್, ಮಾಜಿ ಸಚಿವರಾದ ಶ್ರೀನಿವಾಸ ಗೌಡ ಮತ್ತು ಆದಿಮ ಸಾಂಸ್ಕೃತಿಕ ಸಂಘಟನೆಯ ಪದಾಧಿಕಾರಿಗಳು, ಪೋಷಕರು ಮತ್ತು ದಲಿತ ಚಳವಳಿಯ ಹೋರಾಟಗಾರರು ಉಪಸ್ಥಿತರಿದ್ದರು.