
ಕನ್ನಡಿಗರಾದ ನಾವು ಮೊದಲು ಕನ್ನಡದ ಮಹತ್ವ ಅರಿತುಕೊಳ್ಳಬೇಕು : ಡಿಸಿ ದಿವಾಕರ
ಕರುನಾಡ ಬೆಳಗು ಸುದ್ದಿ
ವಿಜಯನಗರ, 21- ಭಾಷೆ ನಮ್ಮ ಸಂಸ್ಕೃತಿಯನ್ನು ಜೀವಂತವಿಡುವ ಪ್ರಮುಖ ಸಾಧನವಾಗಿದೆ. ಕನ್ನಡಿಗರಾದ ನಾವು ನಮ್ಮ ನಾಡ ಭಾಷೆಯ ಮಹತ್ವ ಅರಿತುಕೊಳ್ಳಬೇಕು, ಈ ನಿಟ್ಟಿನಲ್ಲಿ ರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ ಆಚರಣೆ ಮಾಡಲು ಎಲ್ಲಾ ಸಿದ್ದತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಸಾಂಪ್ರದಾಯಿಕವಾಗಿ ಹಾಗೂ ಅಚ್ಚುಕಟ್ಟಾಗಿ ನಡೆಸುವುದು ನಮ್ಮೆಲ್ಲರ ಆದ್ಯಕರ್ತವ್ಯ, ಆಚರಣೆ ಮಾಡಲು ಜಿಲ್ಲಾಡಳಿತದ ಜೊತೆ ಸಂಘ-ಸAಸ್ಥೆಗಳು ಕೈಜೋಡಿಸಿದರೆ ಕನ್ನಡ ರಾಜ್ಯೋತ್ಸವದ ಮೇರಗು ಇನ್ನಷ್ಟು ಹೆಚ್ಚುತ್ತದೆ ಎಂದರು.
ಕನ್ನಡಕ್ಕೆ ಬಂದಿರುವ ಜ್ಞಾನಪೀಠ ಪ್ರಶಸ್ತಿಗಳ ಬಗ್ಗೆ ಜನ ಸಾಮಾನ್ಯರಿಗೂ ತಿಳಿಯುವಂತಾಗಬೇಕು. ಇದಕ್ಕಾಗಿ ಜ್ಞಾನಪೀಠ ಪ್ರಶಸ್ತಿ ಪಡೆದ ಕುವೆಂಪು, ದ.ರಾ. ಬೇಂದ್ರೆ, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ.ಕೃ. ಗೋಕಾಕ್, ಯು.ಆರ್. ಅನಂತಮೂರ್ತಿ, ಗಿರೀಶ್ ಕಾರ್ನಾಡ್ ಮತ್ತು ಚಂದ್ರಶೇಖರ ಕಂಬಾರ ರವರ ಭಾವ ಚಿತ್ರಗಳನ್ನು ನಗರದಲ್ಲಿ ಅಳವಡಿಸಿ ಅವರ ಕೃತಿಗಳ ಬಗ್ಗೆ ಭಾವಚಿತ್ರದ ಕೆಳಗೆ ಬರೆಸಬೇಕು ಎಂದು ನಗರಸಭೆಯ ಪೌರಾಯುಕ್ತರಿಗೆ ಸೂಚಿಸಿದರು.
ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಸಭೆ, ಸಮಾರಂಭಗಳಿಗೆ ಭಾಗವಹಿಸುವಿಕೆ ಕಡಿಮೆಯಾಗಿದೆ. ಕನ್ನಡ ರಾಜ್ಯೋತ್ಸವದ ದಿನ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಜೊತೆಗೆ ಸಾರ್ವಜನಿಕರು ಸೇರುವ ಹಾಗೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಹಾಗೂ ತಾಲೂಕು ಕೇಂದ್ರಗಳಲ್ಲಿ ನವಂಬರ್ ೧ ರಂದು ಕಡ್ಡಾಯವಾಗಿ ರಾಷ್ಟ್ರಧ್ವಜಾರೋಹಣ ಮಾಡಬೇಕು. ಹಂಪಿಯ ಭುವನೇಶ್ವರಿ ದೇವಸ್ಥಾನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ಬರುವ ರಾಜ್ಯೋತ್ಸವ ಜ್ಯೋತಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಿಕೊಡಬೇಕು. ಹಿಂದಿನ ವರ್ಷದಂತೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸುವ ಪಥ ಸಂಚಲನಾ ಮತ್ತು ಕವಾಯತ್ ತಂಡಗಳ ಸೇರ್ಪಡೆ, ಮುಖ್ಯ ಅತಿಥಿಗಳಿಂದ ರಾಷ್ಟ್ರಧ್ವಜಾರೋಹಣ, ಪರೇಡ್ ವೀಕ್ಷಣೆ ಹಾಗೂ ಮಕ್ಕಳಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಆಚರಣೆಯಲ್ಲಿ ಯಾವೂದೇ ಲೋಪ ದೋಷಗಳಿಲ್ಲದೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಸಂಘ-ಸ0ಸ್ಥೆಗಳ ಮುಖಂಡರು ಮಾನತಾಡಿ, ನಗರದ ಎಲ್ಲ ಮಳಿಗೆಗಳಿಗೆ ಆಳವಡಿಸುರವ ನಮಫಲಕಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಇರುವಂತೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡರು. ಅದರಂತೆ ಜಿಲ್ಲಾಧಿಕಾರಿ ಅವರು ನಗರದ ಎಲ್ಲ ಮಳಿಗೆಗಳಿಗೆ ಆಳವಡಿಸಿರುವ ನಾಮಫಲಕಗಳು ಕನ್ನಡ ಭಾಷೆಯಲ್ಲಿ ಇರುವಂತೆ ಕ್ರಮವಹಿಸಿ ಎಂದು ನಗರಸಭೆ ಪೌರಾಯುಕ್ತರಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಮ್ ಷಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಪದವಿ ಪುರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ನಾಗರಾಜ ಹವಾಲ್ದಾರ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಹೆಚ್.ಎಸ್., ಹೊಸಪೇಟೆ ತಾಹಶೀಲ್ದಾರರಾದ ಶೃತಿ ಎಂ.ಎA., ನಗರಸಭೆ ಪೌರಾಯುಕ್ತರಾದ ಚಂದ್ರಪ್ಪ ಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ.ಕೆ ರಂಗಣ್ಣನವರ ಸೇರಿದಂತೆ ವಿವಿಧ ಅಧಿಕಾರಿಗಳು ಮತ್ತು ಕರ್ನಾಟಕ ರಕ್ಷಣ ವೇದಿಕೆ ಹಾಗೂ ವಿವಿಧ ಸಂಘ-ಸAಸ್ಥೆಯ ಮುಖಂಡರು ಉಪಸ್ಥಿತರಿದ್ದರು.