
ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಕನ್ನಡದ ಮೊದಲ ಶಾಸನ ಪ್ರತಿಕೃತಿ ಪ್ರತಿಷ್ಠಾಪನೆ
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಿಂದ ಹಲ್ಮಿಡಿ ಶಾಸನದ ಪ್ರತಿಕೃತಿ ಪ್ರತಿಷ್ಠಾಪನೆ ಅನಾವರಣ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,01- ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಪ್ರತಿಷ್ಠಾಪಿಸಿದ ಕನ್ನಡದ ಮೊದಲ ಶಾಸನ “ಹಲ್ಮಿಡಿ ಶಾಸನ”ದ ಪ್ರತಿಕೃತಿ ಪ್ರತಿಷ್ಠಾಪನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಶುಕ್ರವಾರದಂದು ಅನಾವರಣಗೊಳಿಸುವರು.
ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ರಾಜ್ಯ ಸರ್ಕಾವು ಕನ್ನಡದ ಮೊದಲ ಶಾಸನದ ಬಗ್ಗೆ ಸಾರ್ವಜನಿಕರುಗೆ ತಿಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿ ಪ್ರತಿಷ್ಠಾಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಪ್ರತಿಷ್ಟಾಪಿಸಲಾಯಿತು.
ಸಚಿವರು, ಸಂಸದರು, ಡಿಸಿ, ಸಿಇಓ, ಎಸ್ಪಿ ಹಾಗೂ ಮತ್ತಿತರ ಅಧಿಕಾರಿಗಳು ಸೇರಿ ಹಲ್ಮಿಡಿ ಶಾಸನದ ಪ್ರತಿಕೃತಿಗೆ ಪುಷ್ಪಾರ್ಪಿಸಿದರು. ಈ ವೇಳೆ ವಿವಿಧ ಕಲಾತಂಡಗಳ ಕಲಾ ಪ್ರದರ್ಶನವು ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಿತು.
ಈ ಸಂದರ್ಭದಲ್ಲಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯ ನಿರ್ದೇಶಕ ಕೊಟ್ರೇಶ ಮರಬನಹಳ್ಳಿ, ಕೊಪ್ಪಳ ತಹಶಿಲ್ದಾರ ವಿಠ್ಠಲ ಚೌಗಲಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.