
NEET ಹಾಗೂ NET ಹಗರಣಗಳನ್ನು ವಿರೋಧಿಸಿ ಪ್ರತಿಭಟನೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 4- NTA ರದ್ದು ಪಡಿಸಲು ಮತ್ತು ರಾಜ್ಯ ಮಟ್ಟದಲ್ಲಿಯೇ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ನಡೆಸಬೇಕೆಂದು ಆಗ್ರಹಿಸಿ ಅಖಿಲ ಭಾರತ ಮಟ್ಟದ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದರು.
NEET ಹಾಗೂ NET ಹಗರಣಗಳನ್ನು ವಿರೋಧಿಸಿ NTA ಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಅಖಿಲ ಭಾರತ ಪ್ರತಿಭಟನಾ ಪ್ರದರ್ಶನ ಹಿನ್ನೆಲೆಯಲ್ಲಿ ಇಂದು ಬಳ್ಳಾರಿಯ ಸರ್ಕಾರಿ ಜಿಲ್ಲಾ ಆಸ್ಪತ್ರೆ ಕಾಂಪೌಂಡ್ ಹತ್ತಿರ ವಿದ್ಯಾರ್ಥಿಗಳು ಎಐಡಿಎಸ್ಓ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಎಐಡಿಎಸ್ಓ ಜಿಲ್ಲಾಧ್ಯಕ್ಷರು ಕೆ ಈರಣ್ಣ ಅವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ನೀಟ್ ಯುಜಿಯಲ್ಲಿನ ಭ್ರಷ್ಟಾಚಾರವು ಹೊರ ಬಿದ್ದಿರುವ ಬೆನ್ನಲ್ಲೇ, ಎನ್. ಟಿ.ಎ ಯಿಂದ ಆಯೋಜಿಸಲ್ಪಟ್ಟ ನೆಟ್ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯವು ರದ್ದುಗೊಳಿಸಿದೆ. ಪರೀಕ್ಷೆ ನಡೆದ ಮರುದಿನವೇ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮೊನ್ನೆ ನೀಟ್ ಆದ್ರೆ ಇಂದು ನೆಟ್ ಪರೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಕೇಳಿ ಬಂದಿದೆ. ಮಿಲಿಯಾಂತರ ವಿದ್ಯಾರ್ಥಿಗಳು ವರ್ಷಗಟ್ಟಲೆ ಈ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ನೀಟ್ ಪರೀಕ್ಷೆಯಲ್ಲಿ ನಡೆದ ಗಂಭೀರ ಪ್ರಮಾಣದ ಅವ್ಯವಹಾರವನ್ನು ಚಿಕ್ಕದೆಂದು ಬಿಂಬಿಸಲು ಶಿಕ್ಷಣ ಸಚಿವಾಲಯ ಮತ್ತು ಎನ್ ಟಿ ಎ ಪ್ರಯತ್ನಿಸುತ್ತಲೇ ಇವೆ. ನೆಟ್ ಪರೀಕ್ಷೆಯಲ್ಲಿ ನಡೆದ ಅವ್ಯವಹಾರಗಳು ಈ ಪ್ರಕರಣದ ತೀವ್ರತೆಯನ್ನು ಪ್ರತಿಬಿಂಬಿಸುತ್ತಿವೆ. ಅಷ್ಟೇ ಅಲ್ಲದೆ, ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಪವಿತ್ರತೆಯನ್ನು ಕಾಪಾಡಲು ಪರೀಕ್ಷೆ ನಡೆದ ಮರುದಿನವೇ ಅದನ್ನು ರದ್ದು ಪಡಿಸಿ ಸಿಬಿಐಗೆ ಒಪ್ಪಿಸಲಾಗಿದೆ.
ಈ ನಡೆಯು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಪರೀಕ್ಷಾ ಕೇಂದ್ರಗಳಿಗೆ ತಲುಪಲು ದೂರದ ಪ್ರಯಾಣ, ವಸತಿ, ಅಧಿಕ ಪ್ರಮಾಣದ ಪರೀಕ್ಷಾ ಶುಲ್ಕ ಸೇರಿದಂತೆ ಮಿಲಿಯಾಂತರ ಅಭ್ಯರ್ಥಿಗಳ ವೆಚ್ಚಕ್ಕೆ ಯಾರು ಹೊಣೆ? ಎಲ್ಲದಕ್ಕೂ ಮಿಗಿಲಾಗಿ ಎನ್ ಟಿ ಎ ಪ್ರದರ್ಶಿಸುತ್ತಿರುವ ಬೇಜವಾಬ್ದಾರಿ, ಅಸಮರ್ಥತೆ ಮತ್ತು ಪಾರದರ್ಶಕತೆಯ ಕೊರತೆಯು ಮಿಲಿಯಾಂತರ ಅಭ್ಯರ್ಥಿಗಳ ಭವಿಷ್ಯವನ್ನು ಅತಂತ್ರಕ್ಕೆ ದೂಡಿದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದರು.
ವ್ಯಾಪಾರೀಕರಣ, ಅನಾರೋಗ್ಯ ಪೀಡಿತ ಸ್ಪರ್ಧೆ ಮತ್ತು ವ್ಯಾಪಕ ಭ್ರಷ್ಟಾಚಾರವು ಜಾರಿಯಲ್ಲಿರುವಾಗ, ಒಂದು ಕೇಂದ್ರೀಕೃತ ಪರೀಕ್ಷೆಯು ಭ್ರಷ್ಟಾಚಾರದ ಏಕಸ್ವಾಮ್ಯಾಧಿಕಾರವನ್ನುಂಟು ಮಾಡಬಲ್ಲದೆ ಹೊರತು, ಈ ಯಾವ ಸಮಸ್ಯೆಯನ್ನೂ ಪರಿಹರಿಸುವುದಿಲ್ಲ.
ಈ ಹಿನ್ನೆಲೆಯಲ್ಲಿ, ನೀಟ್ ಮತ್ತು ನೆಟ್ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮದ ಕುರಿತು ಸಮರೋಪಾದಿಯಲ್ಲಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು. ಶಿಕ್ಷಕರು ಮತ್ತು ಸೌಲಭ್ಯಗಳನ್ನು ಒದಗಿಸಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು ಹಾಗೂ ಪ್ರಬಲ ಕೋಚಿಂಗ್ ಸಂಸ್ಥೆಗಳ ಮೇಲೆ ನಿಬಂಧನೆ ವಿಧಿಸಬೇಕು.ಪ್ರಕರಣವು ತಾರ್ಕಿಕ ಅಂತ್ಯ ತಲುಪುವವರೆಗೂ ನೀಟ್ ಕೌನ್ಸಿಲಿಂಗ್ ಅನ್ನು ತಡೆಹಿಡಿಯಬೇಕು. ನೆಟ್ ಮರುಪರೀಕ್ಷೆಯ ದಿನಾಂಕವನ್ನು ಕೂಡಲೇ ಪ್ರಕಟಿಸಿ, ನೇರವಾಗಿ ಯುಜಿಸಿಯೇ ಪರೀಕ್ಷೆಯನ್ನು ನಡೆಸಬೇಕು ಹಾಗೂ ರಾಜ್ಯ ಮಟ್ಟದಲ್ಲಿಯೇ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ನಡೆಸಬೇಕೆಂದು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷರು ಎಂ ಶಾಂತಿ, ಪ್ರಮೋದ್ ಕುಮಾರ್ , ಕಛೇರಿ ಕಾರ್ಯದರ್ಶಿ ನಿಹರಿಕ, ಖಜಾಂಚಿ ಅನುಪಮ, ಸದಸ್ಯರು ಹೊನ್ನೂರುಸ್ವಾಮಿ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.